ಆಡಿದ ಮಾತು ಉಳಿಸಿಕೊಳ್ಳುವುದೇ ನಿಜವಾದ ಧರ್ಮ ; ರಂಭಾಪುರಿ ಶ್ರೀಗಳು

Written by Malnadtimes.in

Published on:

WhatsApp Group Join Now
Telegram Group Join Now

N.R.PURA | ಮಾತೆಂಬುದು ಸಾಮಾನ್ಯವಾದುದಲ್ಲ. ಅರಿವಿನ ಆಚಾರ ಬದುಕಿನ ಉನ್ನತಿಗೆ ಸೋಪಾನ. ಆಡುವ ಮಾತು ನಡೆಯುವ ದಾರಿ ಇನ್ನೊಂದು ಆಗಬಾರದು. ಆಡಿದ ಮಾತಿನಂತೆ ನಡೆದುಕೊಳ್ಳುವುದೇ ನಿಜವಾದ ಧರ್ಮ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಸೋಮವಾರ ಶ್ರೀ ರಂಭಾಪುರಿ ಪೀಠದಲ್ಲಿ ಜರುಗಿದ ಶ್ರಾವಣ ಇಷ್ಟಲಿಂಗ ಮಹಾಪೂಜಾ ಹಾಗೂ ನೂಲ ಹುಣ್ಣಿಮೆಯ ಪುರಾಣ ಪ್ರವಚನ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ನದಿಯ ನೀರನ್ನು ಎಷ್ಟು ತುಂಬಿದರೂ ಅದು ಹೇಗೆ ಖಾಲಿಯಾಗುವುದಿಲ್ಲವೋ ಹಾಗೆಯೇ ಧರ್ಮದ ಅರಿವನ್ನು ಎಷ್ಟು ಅರಿತರೂ ಅದು ಖಾಲಿಯಾಗುವುದಿಲ್ಲ. ಅಧರ್ಮದ ಕವಚ ಹೊತ್ತ ವಿಚಾರಗಳು ಬಹಳ ಕಾಲ ಉಳಿಯಲಾರವು. ಜನರು ಯತಾರ್ಥ ಅರಿತು ಸಾತ್ವಿಕ ಸಮೃದ್ಧ ನಾಡನ್ನು ಕಟ್ಟಲು ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ. ವಿಚಾರ ವಿಮರ್ಶೆಗಳು ಸಂಸ್ಕೃತಿಯ ಮೇಲೆ ಹೊಸ ಬೆಳಕು ಮೂಡಿಸಬೇಕೆ ವಿನಾ ಜನರನ್ನು ನಾಸ್ತಿಕರನ್ನಾಗಿ ಮಾಡುವ ಪ್ರಯತ್ನವನ್ನು ಯಾರೂ ಮಾಡಬಾರದು. ಮಾನವನಿಗೆ ಉತ್ತಮ ಸಂಸ್ಕಾರ ದೊರೆತರೆ ಬೆಲೆಯುಳ್ಳ ಬದುಕು ಸಾರ್ಥಕಗೊಳ್ಳುತ್ತದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ನೀಡಿದ ವಿಶ್ವ ಬಂಧುತ್ವದ ಶಾಂತಿ ಸಾಮರಸ್ಯದ ಸಂದೇಶ ಸಕಲ ಜೀವಾತ್ಮರ ಶ್ರೇಯೋಭಿವೃದ್ಧಿಗೆ ಸ್ಫೂರ್ತಿಯಾಗಿದೆ ಎಂದರು.

ಜಗದ್ಗುರು ರಂಭಾಪುರಿ ಮಹಾ ಪೀಠದಲ್ಲಿ ಶಕ್ತಿಮಾತೆ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ನಡೆಸಿದ ಹೋಮದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು ಪಾಲ್ಗೊಂಡರು.

ಮಳಲಿ ಸಂಸ್ಥಾನ ಮಠದ ಡಾ.ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಶುದ್ಧವಾದ ಬುದ್ಧಿ ಸಂಪತ್ತಿನ ಆಗರ. ಮನುಷ್ಯನಿಗೆ ಆಹಾರ ನೀರು ದೈಹಿಕ ವಿಕಾಸಕ್ಕೆ ಕಾರಣವಾದರೆ ಧರ್ಮ ಬದುಕನ್ನು ವಿಕಾಸಗೊಳಿಸಿ ಅಭಿವೃದ್ಧಿ ಪಥದತ್ತ ಕರೆದೊಯ್ಯುತ್ತದೆ ಎಂದರು. ಹುಡಗಿ ಹಿರೇಮಠದ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಿದ್ದರು.

ಉಟಗಿ ಹಿರೇಮಠದ ಶಿವಪ್ರಸಾದ್ ದೇವರು ಶ್ರೀ ಜಗದ್ಗುರು ರೇಣುಕ ವಿಜಯ ಪುರಾಣದಲ್ಲಿ ಬರುವ ಶ್ರೀ ಜಗದ್ಗುರು ರೇಣುಕಾಚಾರ್ಯರ ಧಾರ್ಮಿಕ ಮತ್ತು ಸಾಮಾಜಿಕ ಸತ್ಕ್ರಾಂತಿಯನ್ನು ವಿವರಿಸಿದರು.

ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲದ ಸಾಧಕರಿಂದ ವೇದಘೋಷ, ಗುರುಕುಲದ ಕುಲಪತಿ ಸಿದ್ಧಲಿಂಗಯ್ಯ ಹಿರೇಮಠ ಇವರಿಂದ ಭಕ್ತಿ ಗೀತೆ ಜರುಗಿತು. ಶಾಲಾ ಮಕ್ಕಳಿಂದ ನೂಲ ಹುಣ್ಣಿಮೆ ಪ್ರಯುಕ್ತ ಮನರಂಜನಾಗ ಕಾರ್ಯಕ್ರಮಗಳು ಜರುಗಿದವು.

ಶ್ರೀ ಪೀಠದ ಲೆಕ್ಕಾಧಿಕಾರಿ ಸಂಕಪ್ಪನವರ, ಮಠದ ಚಂದ್ರಶೇಖರ ಹಾಗೂ ಗುರುಕುಲದ ಎಲ್ಲ ಶಿವಯೋಗ ಸಾಧಕರು ಉಪಸ್ಥಿತರಿದ್ದರು. ಶಿಕ್ಷಕ ವೀರೇಶ ಕುಲಕರ್ಣಿ ನಿರೂಪಿಸಿದರು.

ಬಾಳೆಹೊನ್ನೂರು ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯ ಸಂಸ್ಥೆಯಿಂದ ಸಹೋದರಿಯರು ಶ್ರೀ ರಂಭಾಪುರಿ ಜಗದ್ಗುರುಗಳಿಗೆ ರಕ್ಷಾಬಂಧನ ಕಟ್ಟಿ ಆಶೀರ್ವಾದ ಪಡೆದರು.

ಬಾಳೆಹೊನ್ನೂರು ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯ ಸಂಸ್ಥೆಯಿಂದ ಸಹೋದರಿಯರು ಶ್ರೀ ರಂಭಾಪುರಿ ಜಗದ್ಗುರುಗಳಿಗೆ ರಕ್ಷಾಬಂಧನ ಕಟ್ಟಿ ಆಶೀರ್ವಾದ ಪಡೆದರು.

ಬ್ಯಾಡಗಿ ನಗರದ ರವೀಂದ್ರ ಸುನಂದಾ ಮತು ಮಂಜುನಾಥ ಶಾಸ್ತ್ರಿಗಳು ಇಂದಿನ ಅನ್ನದಾಸೋಹ ಸೇವೆ ಸಲ್ಲಿಸಿದರು. ಬೆಳಗ್ಗೆ ಶ್ರೀ ರಂಭಾಪುರಿ ಜಗದ್ಗುರುಗಳು 33ನೇ ವರ್ಷದ ಶ್ರಾವಣ ಇಷ್ಟಲಿಂಗ ಪೂಜಾ ತಪೋನುಷ್ಠಾನಗೈದು ಬಂದ ಭಕ್ತರಿಗೆ ಶುಭ ಹಾರೈಸಿದರು.

Leave a Comment

error: Content is protected !!