HOSANAGARA | 14 ರಿಂದ 17 ವರ್ಷದೊಳಗಿನ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಚೆಸ್ ಹಾಗೂ ಯೋಗಾಸನ ಸ್ಪರ್ಧೆಯು ತಾಲೂಕಿನ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಯಳಗಲ್ಲು ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆಯಿತು.
ಈ ಸ್ಪರ್ಧಾಕೂಟವನ್ನು ಗ್ರಾಮ ಪಂಚಾಯತಿ ಅಧ್ಯಕ್ಷ ಉಮೇಶ್ ಕಲಗೋಡು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳಾ ದೇವರಾಜ್, ಕೋಡೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುಧಾಕರ ಗೌಡ, ಸದಸ್ಯ ಜಯಪ್ರಕಾಶ್ ಶೆಟ್ಟಿ, ಪಿಡಿಓ ಎಸ್.ನಾಗರಾಜ್, ಬಿಇಒ ಹೆಚ್.ಆರ್. ಕೃಷ್ಣಮೂರ್ತಿ, ಜಿಲ್ಲಾ ದೈಹಿಕ ಪರಿವೀಕ್ಷಕ ಬಾಲಚಂದ್ರ ರಾವ್ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಾಲೂಕಿನ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹಲವು ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು. ವಸತಿ ಶಾಲೆಯ ವ್ಯವಸ್ಥಾಪಕರು ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದು ಎಲ್ಲರ ಗಮನ ಸೆಳೆಯಿತು.