Hosanagara | ಈಗ ಮಳೆಗಾಲ ಪ್ರಾರಂಭವಾಗಿದ್ದು ನಿರುಪಯೋಗಿ ಸಿಮೆಂಟ್ ತೊಟ್ಟಿ, ಡ್ರಮ್, ಟೈಯರ್ ಗಳು, ಮಣ್ಣಿನ ಮಡಿಕೆ, ಕುಡಿದು ಬಿಸಾಕಿದ ಎಳನೀರಿನ ಭಾಗಗಳು ಮುಂತಾದ ಕಡೆ ಶೇಖರವಾದ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು ಇವುಗಳ ನಿಯಂತ್ರಣಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕೆಂದು ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ. ಗುರುಮೂರ್ತಿ ತಾಲೂಕಿನ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿಜ್ಞಾನ ಶಿಕ್ಷಕರಿಗೆ ಸೂಚಿಸಿದರು.
ಅವರು ಇಂದು ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ತಾಲೂಕು ಮಟ್ಟದ ವಿಜ್ಞಾನ ಶಿಕ್ಷಕರಿಗಾಗಿ ಮಾರಕ ರೋಗ ಡೆಂಗ್ಯೂ ನಿಯಂತ್ರಣದ ಬಗ್ಗೆ ಏರ್ಪಡಿಸಿದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿ, ವಿಜ್ಞಾನ ಶಿಕ್ಷಕರು ಈ ಮಾಹಿತಿಗಳನ್ನು ಶಾಲೆಯ ಇತರೆ ಶಿಕ್ಷಕರು ಹಾಗೂ ಮಕ್ಕಳಿಗೆ ಮನವರಿಕೆ ಮಾಡುವಂತೆ ಮಾಹಿತಿ ನೀಡಿದರು.
ಈಗ ಉಲ್ಬಣಿಸುತ್ತಿರುವ ಡೆಂಗ್ಯೂ ಜ್ವರ ವೈರಸ್ನಿಂದ ಉಂಟಾಗುವ ಕಾಯಿಲೆ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತದೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತದೆ ಇದ್ದಕ್ಕಿದ್ದ ಹಾಗೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ರೋಗದ ಲಕ್ಷಣಗಳು ಹಾಗೂ ಬಾಯಿ ಮೂಗು ವಸಡುಗಳಿಂದ ರಕ್ತಸ್ರಾವ ಮತ್ತು ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತದೆ.
ಆರೋಗ್ಯ ಕಾರ್ಯಕರ್ತರು ಆಶಾ ಕಾರ್ಯಕರ್ತರ ಈಗ ಶಿಕ್ಷಕರು ಮಾರಕ ರೋಗಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡುವ ಮೂಲಕ ಸಮುದಾಯದೊಂದಿಗೆ ಕೈಜೋಡಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕಾರಣೀಭೂತರಾಗಬೇಕೆಂದು ಕರೆ ನೀಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ ಪ್ರಾಸ್ತಾವಿಕವಾಗಿ ಮಾತನಾಡಿ, ಡೆಂಗ್ಯೂ ಜೊತೆಗೆ ಮಲೇರಿಯ ಸಹ ಜನರ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುತ್ತಿದ್ದು ಈ ನಿಟ್ಟಿನಲ್ಲಿ ಇಲಾಖೆಯವರೊಂದಿಗೆ ಸಮುದಾಯದವರು ಕೈ ಜೋಡಿಸುವಂತೆ ಅವರು ಕರೆ ನೀಡಿದರು.
ಮಧುಸೂದನ ಸ್ವಾಗತಿಸಿದರು. ಶ್ರೀನಿವಾಸ್ ವಂದಿಸಿದರು.