HOSANAGARA | ಅನುದಾನಿತ ಶಾಲಾ, ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಬೇಡಿಕೆ ಈಡೇರಿಸಲು ಆಗ್ರಹಿಸಿ ಹೊಸನಗರದಲ್ಲಿ ನೌಕರರಿಂದ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.
ಈಗಾಗಲೇ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಎನ್.ಪಿ.ಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೊಳಿಸುವ ಭರವಸೆಯನ್ನು ನೀಡಿದ್ದು ಈ ಭರವಸೆಯಂತೆ ಶೀಘ್ರದಲ್ಲಿ ಹಳೆಯ ನಿಶ್ಚಿತ ಪಿಂಚಣಿ ಜಾರಿಗೊಳಿಸಬೇಕು. ಒಪಿಎಸ್ ಜಾರಿ ವಿಳಂಬವಾದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವಂತೆ ಎನ್.ಪಿ.ಎಸ್ ಯಥಾವತ್ತಾಗಿ ಜಾರಿಗೊಳಿಸಬೇಕು. ಅಂದರೆ ನೇಮಕಾತಿ ಪ್ರಾಧಿಕಾರದ ವಂತಿಕೆಯನ್ನು ಬದಲಾಗಿ ಸರ್ಕಾರವು ಭರಿಸಲು ಕ್ರಮವಹಿಸಬೇಕು. ಕರ್ನಾಟಕ ಖಾಸಗಿ ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗಳ ವೇತನ ನಿವೃತ್ತಿ ವೇತನ ಮತ್ತು ಇತರೆ ಸೌಲಭ್ಯಗಳ ನಿಯಂತ್ರಣ ವಿಧೇಯಕ 2014 ಕ್ಕೆ ತಿದ್ದುಪಡಿ ತಂದು ಅಥವಾ ಭವಿಷ್ಯ ವರ್ತಿಯಾಗಿ ಜಾರಿಗೆ ಬರುವಂತೆ ಕ್ರಮ ವಹಿಸುವುದು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ದಶಕಗಳಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು. ಅನುದಾನಿತ ನೌಕರರಿಗೆ ಕೂಡ ಸರ್ಕಾರಿ ನೌಕರರಂತೆ ಜ್ಯೋತಿ ಸಂಜೀವಿನಿ ಯೋಜನೆಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಸರ್ಕಾರಿ ಶಾಲಾ, ಕಾಲೇಜುಗಳು ಮತ್ತು ಅನುದಾನಿತ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗಾಗಲಿ ಹಾಗೂ ನೌಕರರಿಗೆ ಆಗಲಿ ಯಾವುದೇ ತಾರತಮ್ಯ ನೀತಿ ಮೊದಲಾದ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.
ಪಿಂಚಣಿ ವಂಚಿತ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ ಚಂದ್ರು, ಉಪಾಧ್ಯಕ್ಷ ಎನ್ ಸುಧಾಕರ್, ಪ್ರಧಾನ ಕಾರ್ಯದರ್ಶಿ ಡಿ. ಧರ್ಮಪ್ಪ, ಎಂ.ಎಸ್ ಕುಮಾರ್, ಎಂ.ಎಸ್ ಈಶ್ವರಪ್ಪ, ಚಂದ್ರಶೇಖರ್, ರಾಮಯ್ಯ, ಅಣ್ಣಪ್ಪ, ಪ್ರಶಾಂತ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳಾದ ರಶ್ಮಿ ಹಾಲೇಶ್ ರವರಿಗೆ ಮನವಿ ಸಲ್ಲಿಸಿದರು.