ಕೃಷಿ ನಮ್ಮ ದೇಶದ ಭವಿಷ್ಯ-ಕೃಷಿಕರ ಕೊಡುಗೆ ಅಪಾರ ; ಸಚಿವ‌ ಮಧು ಬಂಗಾರಪ್ಪ

Written by Malnadtimes.in

Updated on:

WhatsApp Group Join Now
Telegram Group Join Now

SHIVAMOGGA | ಕೃಷಿ ನಮ್ಮ ದೇಶದ ಭವಿಷ್ಯವಾಗಿದ್ದು, ಕೃಷಿಗೆ ಎಂದಿಗೂ ಪ್ರಾಮುಖ್ಯತೆ ಇದೆ. ಕೃಷಿ ಮತ್ತು ತೋಟಗಾರಿಕೆ ಕೋರ್ಸ್‍ಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ಅದರ ಸದುಪಯೋಗ ಪಡೆಯಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ವಿದ್ಯಾರ್ಥಿಗಳಿಗೆ ತಿಳಿಸಿದರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ),ಶಿವಮೊಗ್ಗ ಇವರ ಸಹಯೋಗದಲ್ಲಿ ಜೂ.29 ರಂದು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಕೃಷಿ ಶಿಕ್ಷಣ ಸುಗ್ಗಿ-2024 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ಭವಿಷ್ಯದಲ್ಲಿ ಬೇಡಿಕೆ ಇರುವ ವಲಯ ಆಗಲಿದೆ. ಪ್ರಸ್ತುತ ನಮ್ಮ ದೇಶದಲ್ಲಿ ಶೇ.60 ರಷ್ಟು ರೈತರು ಇದ್ದು, ಕೃಷಿ ಕ್ಷೇತ್ರದಿಂದ ಜಿಡಿಪಿಗೆ ಶೇ.17 ಕೊಡುಗೆ ಇದೆ. ದೇಶಕ್ಕೆ ಕೃಷಿಕರ ಕೊಡುಗೆ ಅಪಾರವಾಗಿದೆ. ವಿದ್ಯಾರ್ಥಿಗಳು, ವಿಶೇಷವಾಗಿ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಕೃಷಿ, ತೋಟಗಾರಿಕೆ, ಅರಣ್ಯದಂತಹ ಪದವಿ-ಕೋರ್ಸ್‍ಗಳ ಬಗ್ಗೆ ತಿಳಿದುಕೊಳ್ಳಬೇಕು. ಈ ವೇದಿಕೆಯಲ್ಲಿ ಹಲವಾರು ಸಾಧಕರು, ಕೃಷಿ ತಜ್ಞರು ಕೃಷಿ ಕೋರ್ಸುಗಳು, ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿಕೊಡಲಿದ್ದು, ವಿದ್ಯಾರ್ಥಿಗಳು ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಹಂಬಲ ಬೆಳೆಯುತ್ತದೆ.

ಕೃಷಿ ಉತ್ಪನ್ನಗಳು ಸಾಕಷ್ಟಿದ್ದು ಈ ಬಗ್ಗೆ ಜನರಿಗೆ ತಿಳಿಸುವಲ್ಲಿ ಹಿಂದೆ ಉಳಿದಿದ್ದೇವೆ. ಈ ಕೆಲಸವನ್ನು ನಾವು ಮಾಡಬೇಕಿದೆ. ಹಾಗೂ ಕೃಷಿ ಕೋರ್ಸ್‍ಗಳಿಗೆ ಸಾಕಷ್ಟು ಬೇಡಿಕೆ ಇದ್ದು ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು ಮನವಿ ಮಾಡಿದರು.

ವಿದ್ಯಾರ್ಥಿಗಳೇ ದೇಶದ ಸಂಪನ್ಮೂಲ. ಯಾವುದೇ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅನುತ್ತೀರ್ಣರಾಗಬಾರದು ಹಾಗೂ ಉತ್ತಮ ಅಂಕ ಗಳಿಕೆಯ ಉದ್ದೇಶದಿಂದ ಮೂರು ಪರೀಕ್ಷೆಗಳನ್ನು ಮಾಡಿ ಅದರಲ್ಲಿ ಉತ್ತಮವಾಗಿ ಗಳಿಸಿದ ಅಂಕಗಳನ್ನು ಉಳಿಸಿಕೊಳ್ಳುವ ವ್ಯವಸ್ಥೆ ಪರಿಚಯಿಸಲಾಗಿದೆ. ಈ ವ್ಯವಸ್ಥೆ ರಾಷ್ಟ್ರದಲ್ಲೇ ಮೊದಲನೆ ಪ್ರಯತ್ನವಾಗಿದೆ. ಇದರಿಂದ ವಿದ್ಯಾರ್ಥಿಗಳು ಅನುತ್ತೀರ್ಣರಾಗುವ ಸಂಭವ ಕಡಿಮೆ ಇದ್ದು ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲಕರವಾಗಿದೆ.

ಅನೇಕ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ಪಡೆಯುವುದು ಆರ್ಥಿಕ ಹೊರೆಯಾಗುತ್ತದೆ. ಆದ್ದರಿಂದ ಮೊದಲ ಬಾರಿಗೆ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ಕೋಚಿಂಗ್ ನೀಡಲಾಗುವುದು. ಮೊದಲ ಹಂತದಲ್ಲಿ 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್ ನೀಡುವ ಉದ್ದೇಶ ಹೊಂದಲಾಗಿದೆ.
– ಎಸ್.ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ

ತರೀಕೆರೆ ಕ್ಷೇತ್ರದ ಶಾಸಕರು ಹಾಗೂ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಜಿ.ಹೆಚ್.ಶ್ರೀನಿವಾಸ್ ಮಾತನಾಡಿ, ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸ್ಪರ್ಧೆ ಇದೆ. ಮೆಡಿಕಲ್ ಓದುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಹಲವಾರು ಎಂಜಿನಿಯರಿಂಗ್ ಕಾಲೇಜುಗಳಿದ್ದು ಎಂಜಿನಿಯರಿಂಗ್ ಮುಗಿಸಿದ ಅನೇಕರಿಗೆ ಉದ್ಯೋಗಾವಕಾಶ ಕಷ್ಟವಾಗಿದೆ. ಕೃಷಿ ಮತ್ತು ತೋಟಗಾರಿಕೆ ಕೋರ್ಸ್‍ಗಳ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಕೃಷಿ ಕೋರ್ಸುಗಳನ್ನು ಮಾಡಿದವರಿಗೆ ವಿಫುಲ ಅವಕಾಶಗಳಿವೆ. ಕೃಷಿ ವಿಶ್ವವಿದ್ಯಾಲಯಗಳಲ್ಲಿ ಓದಿದ ಶೇ.15 ರಷ್ಟು ವಿದ್ಯಾರ್ಥಿಗಳಿಗೆ ಹೊರ ರಾಜ್ಯ ಮತ್ತು ದೇಶಗಳಿಗೆ ಹೋಗುವ ಅವಕಾಶವಿದೆ. ಈ ಕೋರ್ಸ್ ಮಾಡಿದವರಿಗೆ ಉದ್ಯೋಗದ ಕೊರತೆ ಇಲ್ಲ. ಇಲ್ಲಿ ಕೌಶಲ್ಯ ಅಭಿವೃದ್ಧಿಗೂ ಒತ್ತು ನೀಡಿ ಕೌಶಲ್ಯವನ್ನು ವೃದ್ದಿಸಲಾಗುತ್ತಿದೆ. ಹಾಗೂ ರೈತರ ಮಕ್ಕಗಳಿಗೆ ಕೃಷಿ, ತೋಟಗಾರಿಕೆ ಕೋರ್ಸುಗಳಲ್ಲಿ ಶೇ.50 ಮೀಸಲಾತಿ ಇದೆ ಎಂದರು.

ಆಡಳಿತ ಮಂಡಳಿ ಸದಸ್ಯರಾದ ಡಾ.ಪಿ.ಕೆ.ಬಸವರಾಜ್ ಮಾತನಾಡಿ, ವಿದ್ಯಾರ್ಥಿಗಳು ಕೃಷಿ ಕೋರ್ಸ್‍ಗಳನ್ನು ಮಾಡಿಕೊಂಡರೆ ಕೃಷಿ ಪರಿಕರ, ರಾಸಾಯನಿಕ ಗೊಬ್ಬರ, ಮಾರ್ಕೆಟಿಂಗ್ ಕಂಪೆನಿಗಳಲ್ಲಿ ಉದ್ಯೋಗಾವಕಾಶ ಲಭಿಸಲಿದೆ. ಗೊಬ್ಬರ ಸಂಶೋಧನೆಯಲ್ಲಿ ಸಹ ಕೃಷಿ ಪದವಿ ಪಡೆದವರಿಗೆ ಅವಕಾಶ ಲಭ್ಯವಿದೆ. ಸಾವಯವ ಗೊಬ್ಬರ ತಯಾರಿಕೆ ಮೂಲಕ ಸ್ವಂತ ಉದ್ದಿಮೆಗೆ ಅವಕಾಶವಿದೆ. ಸಾವಯವ ಕೃಷಿಗೆ ಸಹ ಉತ್ತೇಜನ ದೊರಕಲಿದೆ. ಹಾಗೂ ಸರ್ಕಾರದ ಸಹಾಯಧನ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದ್ದು, ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳಿವೆ ಎಂದು ಮಾಹಿತಿ ನೀಡಿದರು.

ಡಿಡಿಪಿಯು ಕೃಷ್ಣಪ್ಪ ಮಾತನಾಡಿ, ಕೃಷಿ ಅತಿ ಶ್ರೇಷ್ಠ ಕೆಲಸವಾಗಿದೆ. ಮುಂದಿನ ದಿನಗಳಲ್ಲಿ ರೈತರಿಗೆ ಹೆಚ್ಚಿನ ಬೇಡಿಕೆ ಬರಲಿದೆ. ಕೃಷಿ ಮತ್ತು ತೋಟಗಾರಿಕೆ ಅತ್ಯುತ್ತಮ ಕೋರ್ಸ್ ಆಗಿದ್ದು, ಈ ವಿದ್ಯಾರ್ಥಿಗಳು ರೈತರು ವೈಜ್ಞಾನಿಕವಾಗಿ ಬೆಳೆ ಬೆಳೆಯುವ ಕುರಿತು ಹೆಚ್ಚಿನ ಸಂಶೋಧನೆ ನಡೆಸಿ, ರೈತರಿಗೆ ಅನುಕೂಲ ಮಾಡಿಕೊಡಬೇಕೆಂದರು ತಿಳಿಸಿದರು.

ಶಿಕ್ಷಣ ನಿರ್ದೇಶಕ ಹೇಮ್ಲಾನಾಯ್ಕ ಪಿಯುಸಿ ವಿದ್ಯಾರ್ಥಿಗಳಿಗೆ ಕೃಷಿ ಶಿಕ್ಷಣ, ವಿವಿಧ ಕೃಷಿ ಕಾರ್ಯಕ್ರಮಗಳ ಕುರಿತು ಮಾಹಿತಿ, ಕೃಷಿ ಪದವಿಗೆ ಸೇರಲು ಬೇಕಾದ ಅರ್ಹತೆಗಳು, ಕೃಷಿ ಮತ್ತು ತೋಟಗಾರಿಕೆ, ಅರಣ್ಯ ಇತರೆ ಪದವಿ ಪಡೆದವರಿಗೆ ಇರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳಿಗೆ ಕೃಷಿ ಕುರಿತು ಏರ್ಪಡಿಸಲಾಗಿದ್ದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕುಲಸಚಿವರಾದ ಕೆ.ಸಿ ಶಶಿಧರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಈ ಕಾರ್ಯಕ್ರಮ ಕೃಷಿ ಶಿಕ್ಷಣದ ಕುರಿತಾದ ಜಾಗೃತಿ ಅಭಿಯಾನವಾಗಿದೆ. ಕೃಷಿ ಪದವಿ ಬಗ್ಗೆ ಅರಿವಿನ ಕೊರತೆ ಇದೆ. ವಿಶ್ವವಿದ್ಯಾಲಯ ಮಟ್ಟದಲ್ಲಿ ಮಾತ್ರವಲ್ಲ, ರಾಷ್ಟ್ರ ಮಟ್ಟದಲ್ಲಿಯೂ ಕೃಷಿ ಪದವಿ ಪಡೆಯಬಹುದಾಗಿದೆ. ರೈತರ ಮಕ್ಕಳಿಗೆ ಶೇ.50 ಮೀಸಲಾತಿ ಇದ್ದು ಅವರು ಪ್ರಾಯೋಗಿಕ ಪರೀಕ್ಷೆಯನ್ನು ಬರೆದು ಸೀಟು ಪಡೆದುಕೊಳ್ಳಬಹುದು. ಈ ಪ್ರಾಯೋಗಿಕ ಪರೀಕ್ಷೆಗೆ ಯಾವುದೇ ಕೋಚಿಂಗ್ ಅವಶ್ಯಕತೆ ಇಲ್ಲ. ಸುಲಭವಾಗಿರುತ್ತದೆ. ಈ ಕಾರ್ಯಕ್ರಮದಲ್ಲೇ ಈ ಬಗ್ಗೆ ಒಂದು ಅಣಕು ಪರೀಕ್ಷೆ ಏರ್ಪಡಿಸಲಾಗಿದೆ. ಅದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕೆಂದರು. ಹಾಗೂ ಅವರು ಕೃಷಿ ಶಿಕ್ಷಣದ ಪ್ರಾಮುಖ್ಯತೆ ಮತ್ತು ಪಿಯುಸಿ ನಂತರ ಏನು? ಎಂಬ ಬಗ್ಗೆ ಪಿಪಿಟಿ ಪ್ರದರ್ಶನದ ಮೂಲಕ ವಿವರಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಕುವೆಂಪು ರಂಗಮಂದಿರ ಆವರಣದಲ್ಲಿ ಕೃಷಿ ಉತ್ಪನ್ನಗಳು, ಕೀಟಗಳು, ಚಿಟ್ಟೆಗಳು, ವಿವಿಧ ಭತ್ತದ ಬೀಜದ ತಳಿ, ಸಾವಯವ ಕೃಷಿ, ಜೇನು ಸಾಕಾಣಿಕೆ ಸೇರಿದಂತೆ ಕೃಷಿಗೆ ಸಂಬಂಧಿಸಿದ ಮಳಿಗೆಗಳನ್ನು ತೆರೆದು ಪ್ರದರ್ಶನ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯರಾದ ಡಾ.ಬಿ.ಕೆ.ಕುಮಾರಸ್ವಾಮಿ, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Comment

error: Content is protected !!